ಗೂಂಡಾ ಕಾಯ್ದೆ ಅಡಿ ಪುನೀತ್‌ ಕೆರೆಹಳ್ಳಿ ಅರೆಸ್ಟ್‌ – 1 ವರ್ಷ ಸಿಗಲ್ಲ ಜಾಮೀನು – ಕರುನಾಡ ನ್ಯೂಸ್


ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಸಿಸಿಬಿ ಪೊಲೀಸರು (CCB) ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ಬಂಧಿಸಿದ್ದಾರೆ. ಹಾಸನ ಮೂಲದ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿರುವ ಪುನೀತ್‌ ಕೆರೆಹಳ್ಳಿ(32) ಮೇಲೆ 2013 ರಿಂದ 2023 ರವರೆಗೆ 10 ಪ್ರಕರಣಗಳು ದಾಖಲಾಗಿದೆ. ಸಮಾಜ ವಿರೋಧಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯ (Gunda Act) ಅಡಿ ಕೇಸ್‌ ದಾಖಲಿಸಿದ್ದಾರೆ. ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ ಆರೋಪ ಪುನೀತ್‌ ಕೆರೆಹಳ್ಳಿ ಮೇಲೆ ಬಂದಿತ್ತು. ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು ನೇರವಾಗಿ ಜೈಲಿಗೆ ಕಳುಹಿಸಿದ್ದಾರೆ. ಗೂಂಡಾ ಕಾಯ್ದೆಯಲ್ಲಿ ಬಂಧನಕ್ಕೆ ಒಳಗಾದ ಆರೋಪಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ ಮತ್ತು ಒಂದು ವರ್ಷ ಜಾಮೀನು (Bail) ಸಿಗುವುದಿಲ್ಲ. ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸುತ್ತಿದ್ದರು. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳಿವಳಿಕೆ ನೋಟಿಸ್‌ ಜಾರಿ ಮಾಡಿದ್ದರು. ಪುನೀತ್‌ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆದಿದೆ ಎಂದು ಚಾಮರಾಜಪೇಟೆ ಪೊಲೀಸರು ಈ ಹಿಂದೆ ಮಾಹಿತಿ ನೀಡಿದ್ದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡಿದ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಆರೋಪ ಪುನೀತ್‌ ಮೇಲೆ ಬಂದಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯ ಜಾಮೀನು ನೀಡಿತ್ತು. ಜುಲೈ ತಿಂಗಳಿನಲ್ಲಿ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಬಳಿ ಇರುವ ನಾಗರಕಟ್ಟೆಯಲ್ಲಿ ಪೂಜೆ ನಡೆಸಿದ್ದಕ್ಕೆ ಪುನೀತ್‌ ಕೆರೆಹಳ್ಳಿಗೆ ಬೆಂಗಳೂರು ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು. ಬಿಬಿಎಂಬಿ ಮೈದಾನದ ಪಕ್ಕದಲ್ಲಿ ಇರುವ ನಾಗರಕಟ್ಟೆಯ ಬಳಿ ಪೂಜೆಯನ್ನು ಮಾಡಲು ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳಿಂದ ಅನುಮತಿಯನ್ನು ಪಡೆದಿದ್ದಲ್ಲಿ ಅನುಮತಿ ಪತ್ರದ ಪ್ರತಿಯನ್ನು ನೀಡುವಂತೆ ನೋಟಿಸ್ ಕೊಟ್ಟಿದ್ದರು. ಅನುಮತಿ ಪಡೆಯಬೇಕು ಎಂದು ಪುನಿತ್ ಕೆರೆಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ವಿಪಕ್ಷ ಬಿಜೆಪಿ (BJP) ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತ್ತು.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ